25 ವರ್ಷಗಳ ನಂತರ ನವೆಂಬರ್ 7 ರಂದು ಕರ್ನಾಟಕ ರತ್ನ ಡಾ||ವಿಷ್ಣುವರ್ಧನ್ ಅಭಿನಯದ “ಯಜಮಾನ” ಚಿತ್ರ ಮರು ಬಿಡುಗಡೆ .

ಜನಮೆಚ್ಚಿದ ಈ ಕೌಟುಂಬಿಕ ಚಿತ್ರಕ್ಕೆ ಆಧುನಿಕ ತಂತ್ರಜ್ಞಾನದ ಜೋಡಣೆ‌ .

ಸರಿಯಾಗಿ 25 ವರ್ಷಗಳ ಹಿಂದೆ 2000 ನೇ ಇಸವಿಯಲ್ಲಿ ತೆರೆಕಂಡ ಕರ್ನಾಟಕ ರತ್ನ ಡಾ||ವಿಷ್ಣುವರ್ಧನ್ ಅಭಿನಯದ, ಮೆಹರುನ್ನಿಸಾ ರೆಹಮಾನ್ ನಿರ್ಮಾಣದ ಹಾಗೂ ಆರ್ ಶೇಷಾದ್ರಿ – ರಾಧಾ ಭಾರತಿ ನಿರ್ದೇಶನದ “ಯಜಮಾನ” ಚಿತ್ರ ಇದೇ ನವೆಂಬರ್ 7 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಮರು ಬಿಡುಗಡೆಯಾಗುತ್ತಿದೆ. ಜನಮೆಚ್ಚಿದ ಈ ಚಿತ್ರ‌ ಆಧುನಿಕ ತಂತ್ರಜ್ಞಾನದಿಂಸ ಸಿಂಗಾರಗೊಂಡಿದೆ. ಮುನಿಸ್ವಾಮಿ ಎಸ್ ಡಿ ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ. ಚಿತ್ರದ ರಜತೋತ್ಸವವನ್ನು ಸಂಭ್ರಮಿಸಲು ಕಲಾವಿದರ ಸಂಘದಲ್ಲಿ ಅದ್ದೂರಿ ಸಮಾರಂಭ ಆಯೋಜಿಸಲಾಗಿತ್ತು. ಚಿತ್ರದ ನಿರ್ಮಾಪಕರು, ಕಲಾವಿದರು ಹಾಗೂ ತಂತ್ರಜ್ಞರು ಸಮಾರಂಭದಲ್ಲಿ ಭಾಗಿಯಾಗಿದ್ದರು. “ಯಜಮಾನ” ಚಿತ್ರದ ಕುರಿತು ನೆನಪಿನ ಬುತ್ತಿ ಬಿಚ್ಚಿಟ್ಟರು.

ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕ ರೆಹಮಾನ್, ಈ ಚಿತ್ರ ಆಗಲು ಪ್ರಮುಖ ಕಾರಣ ಗುರು ಸಮಾನರಾದ ವಿಷ್ಣುವರ್ಧನ್ ಹಾಗೂ ಕೆ.ವಿ.ನಾಗೇಶ್ ಕುಮಾರ್ ಅವರು. 130ಕ್ಕೂ ಹೆಚ್ಚು ಕಡೆ ಶತದಿನೋತ್ಸವ, 40ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಇಪ್ಪತ್ತೈದು ವಾರ ಹಾಗೂ 4 ಕಡೆಗಳಲ್ಲಿ 1 ವರ್ಷ ಈ ಸಿನಿಮಾ ಓಡಿದೆ. 25 ವರ್ಷಗಳ ಹಿಂದೆಯೇ 35 ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದ ಚಿತ್ರವಿದು. ವಿಷ್ಣುವರ್ಧನ್, ಪ್ರೇಮ, ಶಶಿಕುಮಾರ್, ಅಭಿಜಿತ್, ರಮೇಶ್ ಭಟ್, ಟೆನ್ನಿಸ್ ಕೃಷ್ಣ ಹೀಗೆ ಅನೇಕ ಕಲಾವಿದರ ಅದ್ದೂರಿ ತಾರಾಬಳಗವಿರುವ ಈ ಚಿತ್ರವನ್ನು ಈಗ ಮುನಿಸ್ವಾಮಿ ಅವರು ಮರು ಬಿಡುಗಡೆ ಮಾಡುತ್ತಿದ್ದಾರೆ. ಹಿಂದೆ ನೀವು ನೀಡಿದ ಗೆಲುವಿಗಿಂತ ದೊಡ್ದ ಗೆಲುವನ್ನು ಈಗ ನೀಡಿ ಎಂದರು‌.

“ಯಜಮಾನ” ಚಿತ್ರವನ್ನು ಡಿಐ ಬಳಸಿ 4k ಡಿಜೆಟಲ್ ಪ್ರೊಜೆಕ್ಷನ್ ಗೆ ತಯಾರು ಮಾಡಲಾಗಿದೆ. ಇಂದಿನ ಆಧುನಿಕ ತಂತ್ರಜ್ಞಾನಗಳನ್ನೊಳಗೊಂಡಿರುವ ಚಿತ್ರಮಂದಿರಗಳಲ್ಲಿ ವೀಕ್ಷಿಸಬಹುದು. ಇನ್ನು, ಮೋನೊ ಟ್ರ್ಯಾಕ್ ನಲ್ಲಿದ್ದ ಈ ಚಿತ್ರದ ಕಲಾವಿದರ ಧ್ವನಿಗಳನ್ನು ಸಹ 5.1 ಹಾಗೂ 7.1 ಡಿಜಿಟಲ್ ಸೌಂಡ್ ಗೆ ಬಹಳ ಕಷ್ಟಪಟ್ಟು ವರ್ಗಾಯಿಸಲಾಗಿದೆ. ಹಾಡುಗಳಿಗೂ ಸಹ ಇದೇ ರೀತಿ ನೂತನ ತಂತ್ರಜ್ಞಾನ ಅಳವಡಿಸಲಾಗಿದೆ. ನುರಿತ ತಂತ್ರಜ್ಞರನ್ನು ಕರೆಸಿ ಅವರಿಂದ ಈಗಿನ ಆಧುನಿಕ ರೀತಿಯಲ್ಲಿ ಸೌಂಡ್ ಎಫೆಕ್ಟ್ ಅಳವಡಿಸಲಾಗಿದೆ. ಇದಕ್ಕೆಲ್ಲಾ ಬಹಳ ಸಮಯ ಹಾಗೂ ಹಣ ಹಿಡಿಸಿದೆ. ಮುನಿಸ್ವಾಮಿ ಅವರು ಯಾವುದೇ ಕೊರತೆ ಬಾರದ ಹಾಗೆ ಎಲ್ಲಾ ಕೆಲಸಗಳನ್ನು ಮಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ರಾಜೇಶ್ ರಾಮನಾಥ್ ತಿಳಿಸಿದರು.

ನಾನು ಡಾ||ವಿಷ್ಣುವರ್ಧನ್ ಅವರ ದೊಡ್ಡ ಅಭಿಮಾನಿ. ಅವರ ಮೇಲಿನ ಪ್ರೀತಿಯಿಂದ “ಯಜಮಾನ” ಚಿತ್ರವನ್ನು ಈಗಿನ ತಂತ್ರಜ್ಞಾನವನ್ನು ಅಳವಡಿಸಿ ಮರು ಬಿಡುಗಡೆ ಮಾಡುತ್ತಿದ್ದೇನೆ‌. ನವೆಂಬರ್ 7 ರಂದು 150 ಕ್ಕೂ ಹೆಚ್ಚು ಕಡೆ ಬಿಡುಗಡೆಯಾಗಲಿದೆ. ದಯವಿಟ್ಟು ಎಲ್ಲರೂ ಚಿತ್ರಮಂದಿರಗಳಲ್ಲೇ ಈ ಚಿತ್ರವನ್ನು ವೀಕ್ಷಿಸಿ ಎಂದರು ಮರು ಬಿಡುಗಡೆ ಮಾಡುತ್ತಿರುವ ಮುನಿಸ್ವಾಮಿ.

ಚಿತ್ರದಲ್ಲಿ ನಟಿಸಿರುವ ಶಶಿಕುಮಾರ್, ಅಭಿಜಿತ್, ರಮೇಶ್ ಭಟ್, ಟೆನ್ನಿಸ್ ಕೃಷ್ಣ, ಸಂಭಾಷಣೆ ಬರೆದಿದ್ದ ರವಿಶ್ರೀವತ್ಸ ಮುಂತಾದವರು “ಯಜಮಾನ” ಚಿತ್ರದ ಅನುಭವಗಳನ್ನು ಹಂಚಿಕೊಂಡರು. ಕೆ.ವಿ.ನಾಗೇಶ್ ಕುಮಾರ್, ಕೆ.ಮಂಜು ಹಾಗೂ ಶ್ರೇಯಸ್ ಮಂಜು ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು .

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor